ಕಯ್ಯಾರ ಕಿಞಞಣ್ಣ ರೈ

From Wikipedia

ಕಯ್ಯಾರ ಕಿಞಞಣ್ಣ ರೈ

ಕಯ್ಯಾರ ಕಿಞಞಣ್ಣ ರೈ ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ ೧೯೧೫ ಜೂನ ೮ ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ರೈಯವರು ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ ವಿದ್ವಾನ್ ಪದವಿ ಪಡೆದ ಬಳಿಕ ಬಿ.ಏ.ಪದವಿಯನ್ನು ಪಡೆದು ಅಧ್ಯಾಪಕ ತರಬೇತಿಯನ್ನು ಪೂರೈಸಿದರು. ಆನಂತರ ಎಮ್.ಏ.ಪದವಿಧರರೂ ಆದರು.

ಕಯ್ಯಾರ ಕಿಞಞಣ್ಣ ರೈಯವರು ಸ್ವಾತಂತ್ರ್ಯಸಂಗ್ರಾಮದಲ್ಲಿ ಹೋರಾಡಿದ್ದಾರೆ. ಹರಿಜನ ಸೇವಕ ಸಂಘಟನೆಯಲ್ಲಿ ದುಡಿದಿದ್ದಾರೆ. ಸ್ಥಳೀಯ ಪಂಚಾಯತಿಯ ಅಧ್ಯಕ್ಷ ಪದವಿಯನ್ನೂ ಅಲಂಕರಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಅವರು ಹೋರಾಟ ಮಾಡಿದವರು.

ಕಯ್ಯಾರ ಕಿಞಞಣ್ಣ ರೈಯವರು ಶ್ರೀಮುಖ, ಐಕ್ಯಗಾನ, ಮಕ್ಕಳ ಪದ್ಯಮಂಜರಿ ಮೊದಲಾದ ಕನ್ನಡ ಕವನ ಸಂಕಲನಗಳನ್ನಲ್ಲದೆ ಒಂದು ತುಳು ಕವನ ಸಂಕಲನವನ್ನೂ ಹೊರ ತಂದಿದ್ದಾರೆ. ಕಾರ್ನಾಡ ಸದಾಶಿವರಾವ, ರತ್ನರಾಜಿ, ಏ.ಬಿ.ಶೆಟ್ಟಿ ಮೊದಲಾದವರ ಜೀವನಚರಿತ್ರೆಗಳನ್ನು ಹಾಗು ಕಥಾಸಂಗ್ರಹಗಳನ್ನು ಬರೆದು ಪ್ರಕಟಿಸಿದ್ದಾರೆ. ಭಾರತ ಭಾರತಿ ಪುಸ್ತಕ ಸಂಪದಮಾಲೆಯಲ್ಲಿ ಮಕ್ಕಳಿಗಾಗಿ 'ಪರಶುರಾಮ' ಬರೆದುಕೊಟ್ಟಿದ್ದಾರೆ. 'ವಿರಾಗಿಣಿ' ಎನ್ನುವದು ಇವರು ಬರೆದ ನಾಟಕ. 'ದುಡಿತವೆ ನನ್ನ ದೇವರು' ಎನ್ನುವದು ರೈಯವರ ಅತ್ಮಕಥನ. ಇದಲ್ಲದೆ ವಿವಿಧ ಪತ್ರಿಕೆಗಳಿಗೆ ಇವರು ಬರೆದ ಲೇಖನಗಳ ಸಂಖ್ಯೆಯೆ ಐದುಸಾವಿರದಷ್ಟಾಗುತ್ತದೆ.

೧೯೬೯ರಲ್ಲಿ ರೈಯವರಿಗೆ ಶ್ರೇಷ್ಠ ಅಧ್ಯಾಪಕ ಎಂದು ರಾಷ್ಟ್ರಪ್ರಶಸ್ತಿ ಲಭಿಸಿತು. ಕಯ್ಯಾರ ಕಿಞಞಣ್ಣ ರೈಯವರು ೧೯೯೭ರಲ್ಲಿ ಮಂಗಳೂರಿನಲ್ಲಿ ಜರುಗಿದ ೬೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.